
ಜೂನ್ 20: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ (Stop Dairrhoea Campaign) 2025 ರನ್ನು ಜಿಲ್ಲೆಯ ಯಶಸ್ವಿಯಾಗಿ ಆಯೋಜಿಸುವ ಕುರಿತು ಇಂದು (ಜೂ.20) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ಜರುಗಿತ್ತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ತೀವ್ರ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದು ಈ ಅಭಿಯಾನದ ಉದ್ದೇಶವಾಗಿದೆ. ಜೂನ್ 16, 2025 ರಿಂದ ಜುಲೈ 31, 2025 ರವರೆಗೆ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಈ ಕುರಿತಂತೆ ಕ್ಷೇತ್ರ ಮಟ್ಟದಲ್ಲಿ ಅರಿವು ಮೂಡಿಸುತ್ತಿದ್ದಾರೆ ಎಂದು ಅವರು ಹೇಳಿದರು. ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನದಡಿ ಜಿಲ್ಲೆಯಲ್ಲಿ ಹುಟ್ಟಿದ ಮಗುವಿನಿಂದ ಹಿಡಿದು ಐದು ವರ್ಷದವರೆಗಿನ ಮಕ್ಕಳನ್ನು ಗುರುತಿಸಿ ಓಆರ್ಎಸ್ ನೀಡಲಾಗುತ್ತದೆ. ಜಿಲ್ಲೆಯಲ್ಲಿ 1622 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 95,118 ಮಕ್ಕಳಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಓಆರ್ಎಸ್ ಕಾರ್ನರ್ಗಳನ್ನು ಮಾಡಲು ಮತ್ತು ಕೈತೊಳೆಯುವ ವಿಧಾನ ಕುರಿತಂತೆ ಮಕ್ಕಳಿಗೆ ತಿಳಿಸಿ ಹೇಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಶಾಲೆಗಳಲ್ಲಿ ಕೈಗಳ ಸ್ವಚ್ಚತೆ, ಕೈ ತೊಳೆಯುವ ವಿಧಾನ ಕುರಿತಂತೆ ಮತ್ತು ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಶಾಲಾ ಶಿಕ್ಷಣ ಇಲಾಖೆಗೆ ಅವರು ಸೂಚಿಸಿದರು. ಅಭಿಯಾನದ ಕುರಿತು ಎಸ್.ಡಿ.ಎಮ್ ಧಾರವಾಡ ಮತ್ತು ಕಿಮ್ಸ್ ಹುಬ್ಬಳ್ಳಿ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ವಿಭಾಗ ಮತ್ತು ಸಮುದಾಯ ಆರೋಗ್ಯ ವಿಭಾಗದವರಿಂದಲೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಿಳಿಸಿದರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪಾ ಗಾಬಿ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಅತಿಸಾರದಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಲಭ್ಯವಿರುವುದಾಗಿ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಎಮ್ ಹೊನಕೇರಿ ಅವರು ಮಾತನಾಡಿ, ಇದೊಂದು ಮಹತ್ವದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳು ಸಹಕಾರ ನೀಡಬೇಕೆಂದು ಕೋರಿದರು.ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸುಜಾತಾ ಹಸವೀಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಸಭೆ ನಿರ್ವಹಿಸಿದರು. ಸಭೆಯಲ್ಲಿ ಎಲ್ಲ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ್ ಅಧಿಕಾರಿಗಳು, ತಾಲೂಕಾ ಆರೋಗ್ಯ ಅಧಿಕಾರಿಗಳು, ತಾಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಅಧಿಕಾರಿಗಳು, ಎಸ್.ಡಿ.ಎಮ್ ಮತ್ತು ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ತಜ್ಞ ವೈದ್ಯರು ಉಪಸ್ಥಿತರಿದ್ದರು